ಸಿಂದಗಿ: ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ಜನಸೇವೆಯನ್ನು ಪರಿಣಾಮಕಾರಿಯಾಗಿ ವಿಸ್ತರಿಸುವ ಉದ್ದೇಶದಿಂದ ಸಿಂದಗಿ ನಗರ ಘಟಕದ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ, ಉಪಾಧ್ಯಕ್ಷರಾಗಿ ಕಾಜು ಬಂಕಲಗಿ, ರಜಾಕ ಮುಜಾವರ ಹಾಗೂ ಸುಜಾತ ತಳವಾರ, ಪ್ರಧಾನ ಕಾರ್ಯದರ್ಶಿಗಳಾಗಿ ಪರಶುರಾಮ ಗೋಳ್ಳೂರ ಹಾಗೂ ಪ್ರಕಾಶ ಶೇರಖಾನೆ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಮಾಜಿ ಶಾಸಕ ರಮೇಶ ಭೂಸನೂರ ಸಿಂದಗಿ ನಗರಕ್ಕೆ ಹಲವು ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅವಧಿಯಲ್ಲಿ ಮಾಡಲಾಗಿದೆ, ಆದರು ಸಿಂದಗಿ ನಗರ ಮತದಾರರು ನಗರಸಭೆ ಚುಕ್ಕಾಣಿ ಬಿಜೆಪಿಗೆ ನೀಡುವಲ್ಲಿ ಮನಸು ಮಾಡಿಲ್ಲವಾದರಿಂದ ಬದಲಾವಣೆ ತರಲು ಸಾಧ್ಯವಾಗಲಿಲ್ಲ. ಇಂದಿನ ನಗರಸಭೆ ಬಗ್ಗೆ ಜನರಲ್ಲಿ ಯಾವ ಭಾವನೆ ಇದೆ ಎಂಬುದು ಬಹಿರಂಗ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ನಗರದ ಜನತೆ ನಮ್ಮೊಂದಿಗೆ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ. ನೂತನ ಪದಾಧಿಕಾರಿಗಳೊಂದಿಗೆ ಸಿಂದಗಿ ನಗರಕ್ಕೆ ನೂತನ ಆಡಳಿತದ ಮೂಲಕ ಅಭಿವೃದ್ಧಿ ಪರವಾದ ಕೆಲಸ ಮಾಡಲಾಗುವುದು ಎಂದು ಹೇಳಿದರು. ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿದ್ದು, ಜನಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವ ಕುರಿತು ಚರ್ಚೆ ನಡೆಸಿ, ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದರು. ಪ್ರಶಾಂತ ಕದ್ದರಕಿ, ಸಿದ್ರಾಮ ಆನಗೊಂಡ, ಶಕೀಲ ವಾಲೀಕಾರ, ಎಸ್.ಆರ್.ಪಾಟೀಲ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
