
ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ನಿಷೇಧ ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016 ರಡಿಯಲ್ಲಿ ಸೆಕ್ಷನ 16 ಮತ್ತು 17ರಡಿಯಲ್ಲಿ ನಿರೀಕ್ಷಕರಾಗಿ ನೇಮಕಗೊಂಡ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗಾಗಿ ತರಬೇತಿ ಕಾರ್ಯಗಾರವು ವಿಜಯಪುರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೆಪ್ಟೆಂಬರ್ 21ರಂದು ನಡೆಯಿತು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೆಂಕಣ್ಣ ಬಿ.ಹೊಸಮನಿ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ನ್ಯಾ.ವೆಂಕಣ್ಣ ಹೊಸಮನಿ ಅವರು, ಬಾಲಕಾರ್ಮಿಕ ಪದ್ಧತಿಯು ಮೂಲೋತ್ಪಾಟನೆಯಾಗಬೇಕು. ಈ ಕೆಟ್ಟ ಪದ್ಧತಿಯನ್ನು ತೊಲಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಿಯಾಶೀಲರಾಗಿ ಸಕ್ರಿಯವಾಗಿ ದಾಳಿಗಳನ್ನು ನಡೆಸಿ ಎಚ್ಚರಿಕೆ ಮೂಡಿಸಬೇಕು. ಯಾವುದೇ ಮುಲಾಜಿಲ್ಲದೇ ಪ್ರಕರಣ ದಾಖಲಾಸಿ, ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಕಾನೂನಿನ ಚೌಕಟ್ಟಿನಡಿಯಲ್ಲಿ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಈ ವಿಷಯದಲ್ಲಿ ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಗಳು ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. ಗ್ರಾಮಮಟ್ಟದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ವಿಜಯಪುರ ಜಿಲ್ಲೆಯ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಇಲಾಖೆಗಳು ಬಾಲ ಕಾರ್ಮಿಕತೆಯನ್ನು ತಡೆಗಟ್ಟುವಲ್ಲಿ ಜವಾಬ್ದಾರರಾಗಿದ್ದು, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ಕುಮಾರಿ ನೀಲಮ್ಮ ಖೇಡಗಿ ಅವರು ಪ್ರಾಸ್ತಾವಿಕ ಮಾತನಾಡಿ, ಜಿಲ್ಲಾ ಬಾಲಕಾರ್ಮಿಕ ನಿಷೇಧ ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016 ಬಾಲಕಾರ್ಮಿಕ ಯೋಜನಾ ಸಂಘದ ಇತಿಹಾಸದ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸಿದರು. ವಿಜಯಪುರ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡೋಣ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎಸ್ ಜಿ ಕುಲಕರ್ಣಿ ಮಾತನಾಡಿ, ಬಾಲಕಾರ್ಮಿಕ ದಾಳಿಯಲ್ಲಿ ರಕ್ಷಿಸಲ್ಪಟ್ಟ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯಲ್ಲಿ ದಾಖಲಿಸಿಕೊಂಡು ರಕ್ಷಿಸಲಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ವಿಜಯಪುರದ ಕಾರ್ಮಿಕ ಅಧಿಕಾರಿ ಎಸ್ ಜಿ ಖೈನೂರ, ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ, ಐ ಎಚ್ ಇನಾಮದಾರ, ಮಕ್ಕಳ ಕಲ್ಯಾಣ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎಸ್ ಜಿ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ ಕೆ ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ದೀಪಾಕ್ಷಿ ಜಾನಕಿ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಯದ ಸಮಾಜ ಕಾರ್ಯ ವಿಭಾಗದ ಡಾ. ಪ್ರವೀಣಕುಮಾರ ಕುಲಕರ್ಣಿ ಅವರು ಬಾಲಕಾರ್ಮಿಕ ನಿಷೇಧ ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016 ಕಾಯ್ದೆ ಹಾಗೂ ಸೆಕ್ಷನ 16 ಮತ್ತು 17 ಹಾಗೂ ಬಾಲಕಾರ್ಮಿಕ ದಾಳಿ ಕುರಿತು ಉಪನ್ಯಾಸ ನೀಡಿದರು. ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ ಸ್ವಾಗತಿಸಿದರು. ಬಾಳಪ್ಪ ಅರ್ಜಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ವಿಜಯಪುರ ಜಿಲ್ಲೆಯ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
