
ಸಿಂದಗಿ: ಲೋಕ ಅದಾಲತ್ ಮೂಲಕ ನ್ಯಾಯಾಲಯ ಮತ್ತು ಕಚೇರಿಗಳಲ್ಲಿ ಬಾಕಿಯಿರುವ ಪ್ರಕರಣಗಳು, ವ್ಯಾಜ್ಯಗಳು ಹಾಗೂ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸುವುದು ತಾಲೂಕು ಕಾನೂನು ಸೇವಾ ಸಮಿತಿಯ ದ್ಯೇಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. ೧೨ರಂದು ರಾಷ್ಟ್ರೀಯ ಲೋಕ ಅದಾಲತ್ ಇರುತ್ತದೆ. ಕಾರಣ ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ನ್ಯಾಯಾಲಯ ಹಾಗೂ ಕಚೇರಿಗಳಲ್ಲಿರುವ ಪ್ರಕರಣ ಹಾಗೂ ವ್ಯಾಜ್ಯಗಳನ್ನು ಪೂರ್ವ ಪ್ರಕರಣಗಳ ಕಕ್ಷಿದಾರರು ಲೋಕ ಅದಾಲತ್ ಸದುಪಯೋಗ ಪಡೆಸಿಕೊಳ್ಳಬೇಕು. ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಉಂಟು ಮಾಡಿ ಉಚಿತ ಕಾನೂನು ನೆರವಿನ ಜೊತೆಗೆ ಸಲಹೆ ನೀಡುವುದು ಮತ್ತು ಲೋಕ ಅದಾಲತ್ ಮೂಲಕ ವ್ಯಾಜ್ಯಗಳನ್ನು ಸಂಧಾನದ ಮೂಲಕ ಪರಿಹರಿಸುವುದು ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯವಾಗಿದೆ ಎಂದು ಹೇಳಿದರು.

ಚೆಕ್ ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣ, ವಿದ್ಯುತ್ ಹಾಗೂ ನೀರಿನ ಬಾಕಿ ಶುಲ್ಕಗಳು, ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಕಂದಾಯ ಪಪ್ರಕರಣಗಳು, ಸಿವಿಲ್ ಪ್ರಕರಣಗಳು ಸೇರಿದಂತೆ ಬಾಕಿಯಿರುವ ಪ್ರಕರಣ ಹಾಗೂ ವ್ಯಾಜ್ಯ ಹಾಗೂ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ರಾಜಿಯ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ ಮತ್ತು ಆರ್ಥಿಕವಾಗಿ ದುರ್ಬಲರಾದ ಕಕ್ಷಿದಾರರ ಪ್ರಕರಣಗಳನ್ನು ಸರ್ಕಾರಿ ವಕೀಲರನ್ನು ನೇಮಿಸಿ ಬಗೆಹರಿಸಿಕೊಳ್ಳವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನ್ಯಾಯಾಧೀಶ ಮಹಾಂತೇಶ ಭೂಸಗೋಳ, ನ್ಯಾಯಾಧೀಶ ಹರೀಶ ಜಾಧವ ಮಾತನಾಡಿ, ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳುವವರು ಲೋಕ ಅದಾಲತ್ದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
