

ವಿಜಯಪುರ : ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022 ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ, ಆರ್ಕೆಎಮ್ ಕಾಲೇಜ್, ರೋಟರಿ ಕ್ಲಬ್ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಿಂದ ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಿತು.
ವಿಶ್ವ ಪ್ರಸಿದ್ಧ ಗೋಲಗುಂಬಜ್ ಆವರಣದಲ್ಲಿ ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಬಹು ದಿನಗಳಿಂದಲೂ ಕಡಿಮೆಯಾಗಿದ್ದವು. ರಾಜ್ಯ ಸರ್ಕಾರವು ಮತ್ತೀಗ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಕ್ರಿಯಗೊಳಿಸುತ್ತಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವವರಿಗೆ ನೂತನ ಕೈಗಾರಿಕಾ ನೀತಿಯನ್ವಯ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ರೂಪಿಸಲು ಡಾ.ಸುಧಾಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಕಾರ್ಯಪಡೆಯೊಂದನ್ನು ಸಹ ರಾಜ್ಯ ಸರ್ಕಾರವು ರಚಿಸಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮವು ದೇಶದ ಆರ್ಥಿಕ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಉದ್ಯೋಗವಕಾಶ ಲಭಿಸುತ್ತಿವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳತ್ತ ಬರುವ ನಿಟ್ಟಿನಲ್ಲಿ ಪ್ರವಾಸಿ ತಾಣಗಳನ್ನು ಜನಾಕರ್ಷಣಿಯಗೊಳಿಸುವ ಕಾರ್ಯವನ್ನು ಸರ್ಕಾರಗಳು ಮಾಡುತ್ತಿವೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಅವರು ಪ್ರಾಸ್ತಾವಿಕ ಮಾತನಾಡಿದರು. ಇತಿಹಾಸಕಾರರಾದ ಡಾ.ಅಬ್ದುಲಗಣಿ ಇಮಾರತವಾಲೆ ಅವರು ಪ್ರವಾಸೋದ್ಯಮ ಪುನರಾವಲೋಕನ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಇಗ್ನೋ ಸೆಂಟರನ ಪ್ರಾದೇಶಿಕ ನಿರ್ದೇಶಕರಾದ ಡಾ.ಎ.ವರದರಾಜನ್, ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿಗಳಾದ ರಾಕೇಶ, ಆರ್ಕೆಎಮ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿAಗಯ್ಯ ಹಿರೇಮಠ, ಹೊಟೆಲ್ ಅಸೋಶಿಯೇಶನ್ ಪ್ರಾಂಶುಪಾಲರಾದ ಎನ್.ಆರ್.ರುದ್ರಗೌಡರ, ಹೇರಿಟೇಜ್ ಸಿಟಿಯ ಪೀಟರ್ ಅಲೆಕ್ಸಾಂಡರ್, ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿ ಗುರುಪಾದಯ್ಯ ಹಿರೇಮಠ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕರಾದ ಸುನೀಲಕುಮಾರ ಎಸ್., ಪ್ರವಾಸಿ ಅಧಿಕಾರಿಗಳಾದ ಜಗದೇವ ಗುಣಕಿ, ಅಂಬಾದಾಸ ಜೋಶಿ, ತುಕಾರಾಮ ಪವಾರ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಆರ್ಕೆಎಂ ಆಯುರ್ವೆದ ಕಾಲೇಜು ಮತ್ತು ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
